ಉತ್ತರ ಧ್ರುವದಿಂದ ದಕ್ಷಿಣ ಧ್ರುವಕೆ ‘ಕಲ್ಯಾಣಿ’ ಯಾನ
ಕಲ್ಯಾಣಿ ಚಿತ್ರದ ಶೀರ್ಷಿಕೆ ಅನಾವರಣ
ಜಟ್ಟ’ ಮತ್ತು ‘ಮೈತ್ರಿ’ ಮೊದಲಾದ ವಿಭಿನ್ನ ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವ ನಿರ್ದೇಶಕ ಬಿ. ಎಂ. ಗಿರಿರಾಜ್ ಇದೀಗ ‘ಕಲ್ಯಾಣಿ’ ಎಂಬ ಹೊಸ ಚಿತ್ರವನ್ನು ನಿರ್ದೇಶಿಸಿದ್ದಾರೆ. ಲೇಖಕ ಬಸವ ರೆಡ್ಡಿ ಅವರ ಕಥೆಯನ್ನು ಆಧರಿಸಿದ ಈ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಸದ್ಯ ಪೋಸ್ಟ್-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.
ಚಿತ್ರದ ಶೀರ್ಷಿಕೆ ಹಾಗೂ ಮೋಶನ್ ಪೋಸ್ಟರ್ ಅನ್ನು ಚಿತ್ರತಂಡ ಇತ್ತೀಚೆಗೆ ಅನಾವರಣಗೊಳಿಸಿದೆ.ಸುಮಾರು 45ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕಾರ್ಯಕಾರಿ ನಿರ್ಮಾಪಕರಾಗಿ ಅನುಭವ ಹೊಂದಿರುವ ಕುಮಾರಸ್ವಾಮಿ ಆರ್. ಅವರು ಆರ್. ಕೆ. ಸಿನೆಮಾಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ರಂಗಭೂಮಿ ಕಲಾವಿದ ಸಾಮ್ರಾಟ್ ಶೆಟ್ಟಿ ನಾಯಕನಾಗಿ ನಟಿಸಿದ್ದು, ಉತ್ತರ ಭಾರತದ ನಟಿ ಸಿಮ್ರನ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ರಾಹುಲ್ ಜೇಟ್ಲಿ, ಶಮಂತ್ ರಾವ್, ಪಿ. ಡಿ. ಸತೀಶ್ ಚಂದ್ರ, ಯಮುನಾ ಶ್ರೀನಿಧಿ, ವಿಜಯ್ ಚೆಂಡೂರು, ಶೈಲೇಂದ್ರ, ರಂಗು ಸಮರ್ಪಣ್ ಸೇರಿದಂತೆ ಹಲವು ರಂಗಭೂಮಿ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಚಿತ್ರದ ಕುರಿತು ಮಾತನಾಡಿದ ನಿರ್ದೇಶಕ ಬಿ. ಎಂ. ಗಿರಿರಾಜ್, “ಇದು ನವಿರಾದ ಪ್ರೇಮಕಥೆಯ ಜೊತೆಗೆ ನಂಬಿಕೆ, ಸ್ನೇಹ ಮತ್ತು ವ್ಯಕ್ತಿತ್ವದ (ಐಡೆಂಟಿಟಿ) ವಿಚಾರಗಳನ್ನು ಒಳಗೊಂಡಿರುವ ಚಿತ್ರವಾಗಿದೆ ಎಂದು ತಿಳಿಸಿದ್ದಾರೆ. ಉತ್ತರ ಭಾರತದ ಯುವತಿ ಹಾಗೂ ದಕ್ಷಿಣ ಭಾರತದ ಯುವಕನ ಕಥೆಯ ಮೂಲಕ ಎರಡು ವಿಭಿನ್ನ ಸಂಸ್ಕೃತಿಗಳ ಮುಖಾಮುಖಿಯನ್ನು ಚಿತ್ರದಲ್ಲಿ ಅನಾವರಣಗೊಳಿಸಿರುವುದಾಗಿ ಅವರು ಹೇಳಿದ್ದಾರೆ. ತಮ್ಮ ಹಿಂದಿನ ಸಿನಿಮಾಗಳಿಗಿಂತ ಇದು ಸಂಪೂರ್ಣ ವಿಭಿನ್ನ ಅನುಭವ ನೀಡುವ ಚಿತ್ರವಾಗಲಿದೆ“ ಎಂದಿದ್ದಾರೆ.

ಚಿತ್ರಕ್ಕೆ ಬಿ. ಜೆ. ಭರತ್ ಸಂಗೀತ, ಪ್ರಶಾಂತ್ ಲಾಗರ್ ಛಾಯಾಗ್ರಹಣ ಮತ್ತು ಅರ್ಜುನ್ ಕಿಟ್ಟು ಸಂಕಲನವಿದೆ. ಭಟ್ಕಳ ಹಾಗೂ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದ್ದು,
ಎಲ್ಲವೂ ಯೋಜನೆಯಂತೆ ನಡೆದರೆ ಸೆಪ್ಟೆಂಬರ್ ಅಥವಾ ಅಕ್ಟೋಬರ್ನಲ್ಲಿ ‘ಕಲ್ಯಾಣಿ‘ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆ ಇದೆ.